ಹಿರಿಯಡಕ : ಎಳೆಯ ಮಕ್ಕಳಿಗೆ ಅವಶ್ಯವಿರುವ ಎದೆ ಹಾಲಿನ ಮಹತ್ವವನ್ನು ಸಮಾಜಕ್ಕೆ ತಿಳಿಸುವ ಜವಾಬ್ದಾರಿ ನಮ್ಮದಾಗಬೇಕು. ಸ್ತನ್ಯಪಾನದಲ್ಲಿರುವ ರೋಗನಿರೋಧಕ ಶಕ್ತಿಯ ಮಹತ್ವದ ಬಗ್ಗೆ ಅರಿತುಕೊಂಡಾಗ ಮಾತ್ರ ಅಂಗವೈಫಲ್ಯ ಮತ್ತು ಶಾರೀರಿಕ ದುರ್ಬಲತೆಯನ್ನು ತಡೆಯಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ತಿಳಿಸಿದರು.
ಅವರು ಬುಧವಾರ ಕಾಜಾರಗುತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಜಾರಗುತ್ತು ಮತ್ತು ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ ಇವರ ಸಹಯೋಗದೊಂದಿಗೆ “ಸ್ತನ್ಯಪಾನ ಸಪ್ತಾಹ-2021”ರ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಭವಿಷ್ಯತ್ತಿನ ದೃಷ್ಟಿಯಿಂದ ಉತ್ತಮವಾಗಿ ಪೌಷ್ಠಿಕಾಂಶವನ್ನು ನೀಡುವುದರ ಮೂಲಕ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರನ್ನಾಗಿಸಲು ತಾಯಿ ಎದೆ ಹಾಲಿನ ಮಹತ್ವವನ್ನು ಸಮಾಜದ ಅನಕ್ಷರಸ್ಥರಿಗೂ ತಿಳಿಸಿ, ಅರಿವು ಮೂಡಿಸುವುದರೊಂದಿಗೆ ಇಂತಹ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಪೂರಕವಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬಾಲವಿಕಾಸ ಸಮಿತಿ ಸದಸ್ಯ ಲಕ್ಷ್ಮೀನಾರಾಯಣ, ಸಮಾಜದಲ್ಲಿ ಮಕ್ಕಳ ಅಭಿವೃದ್ಧಿಗೆ ಸಹಕಾರಿಯಾಗುವಂತಹ ಸ್ತನ್ಯಪಾನ ಸಪ್ತಾಹದಂತ ಕಾರ್ಯಕ್ರಮಗಳನ್ನು ಹೆಚ್ಚು-ಹೆಚ್ಚು ಹಮ್ಮಿಕೊಳ್ಳಬೇಕು, ಸರಕಾರ ಶಿಶು ಅಭಿವೃದ್ಧಿಗೆಂದೇ ಹಲವಾರು ಬಾಲವಿಕಾಸದಂತಹ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಸದುಪಯೋಗವನ್ನು ಮಕ್ಕಳು ಪಡೆದುಕೊಂಡಲ್ಲಿ ಮಾತ್ರ ಇಂತಹ ಕಾರ್ಯಕ್ರಮಗಳು ಯಶಸ್ವಿಯಾಗಲು ಸಾಧ್ಯ ಎಂದರು.
ಸಭಾ ಕಾರ್ಯಕ್ರಮದ ನಂತರ ಮಣಿಪಾಲ ಕಾಲೇಜಿನ ನರ್ಸಿಂಗ್ ವಿಭಾಗದ ಅನುಸೂಯ ಸ್ತನ್ಯ ಪಾನ ಮಹತ್ವದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸಾಧು, ಶಾಲಾ ಸಿಬ್ಬಂದಿಗಳು, ಆರೋಗ್ಯ ಸಹಾಯಕಿ ದಾಕ್ಷಾಯಣಿ, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಗರ್ಭಿಣಿಯರು, ಬಾಣಂತಿಯರು, ಅಂಗನವಾಡಿ ಸಹಾಯಕಿಯರು ಉಪಸ್ಥಿತರಿದ್ದರು. ಸಂಗೀತಾ ಎಮ್.ಕೆ ನಿರೂಪಿಸಿ, ಹಿರಿಯ ಅಂಗನವಾಡಿ ಕಾರ್ಯಕರ್ತೆ ಪ್ರೇಮ ವಂದಿಸಿದರು.