ಬೆಂಗಳೂರು : ಸದ್ಯಕ್ಕೆ ಭಾರತದಲ್ಲಿ ಚಿನ್ನದ ಹುಡುಗನ ಕುರಿತೇ ಮಾತು. ಆತನ ಸಾಧನೆಗೆ ಇಡೀ ದೇಶವೇ ಸಂಭ್ರಮಿಸುತ್ತಿದ್ದರೆ, ಇತ್ತ ನೀರಜ್ ಚೋಪ್ರಾಗೆ ತರಬೇತಿ ನೀಡಿ ಶಿರಸಿಯ ಕಾಶಿನಾಥ್ ನಾಯ್ಕ್ ಅವರತ್ತಲೂ ಎಲ್ಲರ ಗಮನ ಹೋಗಿದ್ದು, ರಾಜ್ಯ ಸರ್ಕಾರ 10 ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ.
ಉನ್ನಡ ಜಿಲ್ಲೆಯ ಶಿರಸಿಯ ಕಾಶಿನಾಥ್ ನಾಯ್ಕ್ 2010 ರ ಕಾಮನ್ವೆಲ್ತ್ ನಲ್ಲಿ ಈಟಿ ಎಸೆತದಲ್ಲಿ ಕಂಚಿನ ಪದಕಗಳಿಸಿದ್ದರು.
ಟೋಕಿಯೋ ಓಲಂಪಿಕ್ ನಲ್ಲಿ ಅಮೋಘ ಸಾಧನೆಗೈದ ಭಾರತದ 7 ಕ್ರೀಡಾಪಟುಗಳನ್ನು ರಾಜ್ಯ ಸರ್ಕಾರದ ವತಿಯಿಂದ ಸನ್ಮಾನಿಸಲಾಗುವುದು. ಈಗಾಗಲೆ ಸಿಎಂ ಜೊತೆ ಸಚಿವ ಡಾ. ನಾರಾಯಣಗೌಡ ಚರ್ಚೆ ನಡೆಸಿದ್ದಾರೆ.
ಎಲ್ಲ ಕ್ರೀಡಾಪಟುಗಳನ್ನು ಆಹ್ವಾನಿಸಿ ಗೌರವಿಸಲು ತೀರ್ಮಾನಿಸಿದ್ದಾರೆ. ಇದೇ ಸಂದರ್ಭದಲ್ಲಿ ತರಬೇತುದಾರ ಕಾಶಿನಾಥ್ ಅವರನ್ನು ಸನ್ಮಾನಿಸಲಾಗುವುದು.
ಓಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯುವುದೂ ಒಂದು ದೊಡ್ಡ ಸಾಧನೆಯೆ ಆಗಿದೆ. ಟೋಕಿಯೋ ಓಲಂಪಿಕ್ ನಲ್ಲಿ ಮೂವರು ಕನ್ನಡಿಗರು ಪಾಲ್ಗೊಂಡು ಉತ್ತಮ ಸಾಧನೆ ತೋರಿದ್ದಾರೆ. ಪದಕ ಗಳಿಸಿದ ಕ್ರೀಡಾ ಸಾಧಕರನ್ನು ಗೌರವಿಸಿದಂತೆಯೆ ರಾಜ್ಯದ ಹೆಮ್ಮೆಯ ಕ್ರೀಡಾಪಟುಗಳಾದ ಅದಿತಿ ಅಶೋಕ್, ಶ್ರೀಹರಿ ನಟರಾಜ್, ಫೌವಾದ್ ಮಿರ್ಜಾ ಅವರನ್ನೂ ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.