ಬೆಳಗಾವಿ: ನಿನ್ನೆ ತಡರಾತ್ರಿ ನಗರದಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಹಾನಿಗೊಳಿಸಿ, ಸರ್ಕಾರಿ ಬಸ್, ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟವನ್ನು ಎಂಇಎಸ್ ಕಾರ್ಯಕರ್ತರು ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, 27 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಧ್ವಂಸಗೊಳಿಸಿ, ವಿರೂಪಗೊಳಿಸಿದಂತ ಘಟನೆ ನಿನ್ನೆ ತಡರಾತ್ರಿ ನಡೆದಿತ್ತು. ಇಡೀ ರಾಜ್ಯವೇ ಈ ಪ್ರಕರಣವನ್ನು ಖಂಡಿಸುತ್ತಿದೆ.
ಪೊಲೀಸರು 27 ಎಂಇಎಸ್ ಪುಂಡರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದಂತ ಡಿಸಿಪಿ ವಿಕ್ರಂ ಆಮ್ಟೆ ಅವರು, 4 ಕಡೆಗಳಲ್ಲಿ ಘಟನೆ ಸಂಬಂಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಇಲ್ಲಿಯವರೆಗೆ 27 ಜನರನ್ನು ಪ್ರಕರಣ ಸಂಬಂಧ ಬಂಧಿಸಲಾಗಿದೆ ಎಂದಿದ್ದರು. ಇನ್ನೂ ನಗರದಲ್ಲಿ ಬೆಳಿಗ್ಗೆಯಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಇವತ್ತು ಮತ್ತು ನಾಳೆ ಯಾವುದೇ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ. ಜನರು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ.