ಬೆಂಗಳೂರು : ಅನಾರೋಗ್ಯದಿಂದಾಗಿ ರಾಷ್ಟ್ರಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರು ಇನ್ನಿಲ್ಲ, ಸಾವನ್ನಪ್ಪಿದ್ದಾರೆ ಅಂತ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ವೈರಲ್ ಆಗಿತ್ತು.
ಈ ಬಗ್ಗೆ ಅವರ ಪುತ್ರ ಉಮೇಶ್ ಅವರು ಮಾತನಾಡಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಸಾಲು ಮರದ ತಿಮ್ಮಕ್ಕ ಆರೋಗ್ಯ ಸ್ಥಿರವಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರು ಇನ್ನಿಲ್ಲ, ನಿಧನ ಅನ್ನೋ ಸುದ್ದಿ ಸುಳ್ಳು. ಇಂತಹ ಸುದ್ದಿಗಳನ್ನು ಹರಡಬೇಡಿ. ಅವರು ಬೇಗ ಗುಣಮುಖರಾಗುವಂತೆ ಬೇಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಅಂದಹಾಗೇ ಕೆಲ ದಿನಗಳ ಹಿಂದೆ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಸಾಲುಮರದ ತಿಮ್ಮಕ್ಕ ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.
ಕಳೆದೊಂದು ವಾರದಿಂದ ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲಮರದ ತಿಮ್ಮಕ್ಕ ಅವರು ಬೇಲೂರಿನ ಸಂಬಂಧಿಕರ ಮನೆಗೆ ಹೋದಾಗ ಮನೆಯಲ್ಲಿ ಬಿದ್ದು ಅನಾರೋಗ್ಯ ಉಂಟಾಗಿದ್ದು, ಹಾಸನದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅಲ್ಲಿ ಚಿಕಿತ್ಸೆಗೆ ಹೆಚ್ಚಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಇನ್ನು ಬೆಂಗಳೂರಿನ ಸದ್ಯ ವೈದ್ಯರು ತಿಮ್ಮಕ್ಕ ಅವರಿಗೆ ವಿಶೇಷ ವಾರ್ಡ್ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ, ಕೆಲವರು ಸಾಮಾಜಿಕ ಜಾಲತಾಣದಲ್ಲಿ ಸಾಲು ಮರದ ತಿಮ್ಮಕ್ಕನಿಗೆ ಭಾವಪೂರ್ಣ ಶ್ರದ್ಧಾಂಜಲಿ ಎಂದು ಪೋಸ್ಟ್ ಮಾಡಿಕೊಂಡಿದ್ದಾರೆ.