ಪಟ್ಲ : ನಮ್ಮ ಪರಿಸರದಲ್ಲಿರುವ ಹಿರಿಯ ಸಾಧಕರ ಅನುಭವ ಪೂರಿತ ಮಾತುಗಳನ್ನು ಕೇಳುವಂತಹ ಅವರ ಬಗ್ಗೆ ಓದಿ ತಿಳಿದುಕೊಳ್ಳುವಂತಹ ಮನಸ್ಥಿತಿಯನ್ನು ಮಕ್ಕಳು ಎಳವೆಯಲ್ಲಿಯೇ ಬೆಳೆಸಿಕೊಂಡಾಗ ಅವರ ಭವಿಷ್ಯ ಉಜ್ವಲವಾಗುತ್ತದೆ. ಈ ದೃಷ್ಟಿಯಿಂದ ಸಾಹಿತ್ಯ ಸಾಧಕರನ್ನು ಗುರುತಿಸಿ ಗೌರವಿಸುವಂತಹ ಹಿರಿಯಡಕ ಸಂಸ್ಕೃತಿ ಸಿರಿ ಟ್ರಸ್ಟ್ನ ಇಂತಹ ಕಾರ್ಯಕ್ರಮ ಸ್ತುತ್ಯರ್ಹ.
ಇಂತಹ ಕಾರ್ಯಕ್ರಮದಿಂದ ಗ್ರಾಮೀಣ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಸತ್ ಪ್ರೇರಣೆ ದೊರೆತಂತಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಅಶೋಕ ಕಾಮತ್ ಹೇಳಿದರು.
ಅವರು ಹಿರಿಯಡಕ ಸಂಸ್ಕೃತಿ ಸಿರಿ ಟ್ರಸ್ಟ್ ಇವರ ಆಶ್ರಯದಲ್ಲಿ ಪಟ್ಲ ಯು.ಎಸ್.ನಾಯಕ್ ಪ್ರೌಢಶಾಲೆಯಲ್ಲಿ ನಡೆದ ‘ಸಂಸ್ಕೃತಿ ಸಿರಿ ಪ್ರಶಸ್ತಿ’ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತಾಡಿದರು.
ಟ್ರಸ್ಟ್ ವತಿಯಿಂದ ಜಿಲ್ಲೆಯ ಹಿರಿಯ ಲೇಖಕಿ ಇಂದಿರಾ ಹಾಲಂಬಿ ಅವರಿಗೆ ‘ಸಂಸ್ಕೃತಿ ಸಿರಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ಶಿಕ್ಷಕ ಡಾ.ರಾಘವೇಂದ್ರ ರಾವ್ ಮಕ್ಕಳಿಗೆ ರಾಮಾಯಣದ ಕುರಿತು ರಸಪ್ರಶ್ನೆ ಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು.
ಬಳಿಕ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಹಿರಿಯಡಕ ಸಂಸ್ಕೃತಿ ಸಿರಿ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಪ್ರೊ. ಮುರಳೀಧರ ಉಪಾಧ್ಯ, ಡಾ. ಮುದ್ದಣ್ಣ ಬಾಂದೇಲ್ಕರ್ ಮೊದಲಾದವರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಸೀತಾ ಸನ್ಮಾನಿತರ ಕುರಿತು ಅಭಿನಂದನಾ ಮಾತುಗಳನ್ನು ಆಡಿದರು.
ಮುಖ್ಯ ಶಿಕ್ಷಕ ಶ್ರೀಕಾಂತ್ ಪ್ರಭು ಸ್ವಾಗತಿಸಿದರು. ಶಿಕ್ಷಕ ಶಾಂತಪ್ಪ ಮೂಲಂಗಿ ವಂದಿಸಿದರು.
ಶಿಕ್ಷಕ ಹೆಚ್.ಎನ್. ನಟರಾಜ್ ಕಾರ್ಯಕ್ರಮ ನಿರೂಪಿಸಿದರು.