ಬೆಂಗಳೂರು : ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರನ್ನು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಅಧ್ಯಕ್ಷ ಎಚ್ಡಿ ದೇವೇಗೌಡ ಅವರು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿ ಆದೇಶಿಸಿದ್ದಾರೆ.
ಮಾಜಿ ಕೇಂದ್ರ ಸಚಿವ ಇಬ್ರಾಹಿಂ ಅವರು ಕಾಂಗ್ರೆಸ್ ಎಂಎಲ್ಸಿ ಆಗಿದ್ದರು. ಬಳಿಕ ಪಕ್ಷ ತೊರೆದಿದ್ದ ಅವರು ಜೆಡಿಎಸ್ಗೆ ಸೇರ್ಪಡೆಯಾಗಿದ್ದರು. ಅವರನ್ನು ಜೆಡಿಎಸ್ನ ರಾಜ್ಯಾಧ್ಯಕ್ಷನಾಗಿ ನೇಮಕ ಮಾಡಲಾಗಿತ್ತು.
ಆದರೆ, ಜೆಡಿ(ಎಸ್) ಬಿಜೆಪಿ ನೇತೃತ್ವದ ಎನ್ಡಿಎಗೆ ಸೇರ್ಪಡೆಗೊಂಡಿದ್ದರಿಂದ ಇಬ್ರಾಹಿಂ ತೀವ್ರ ಅಸಮಾಧಾನಗೊಂಡಿದ್ದರು. ಈ ಬಗ್ಗೆ ಅವರು ಸಾರ್ವಜನಿಕವಾಗಿ ಆಕ್ಷೇಪ ಹೊರ ಹಾಕಿದ್ದರು.

ಆದರೆ ಜೆಡಿಎಸ್-ಬಿಜೆಪಿ ಮೈತ್ರಿಯನ್ನು ಅಧಿಕೃತಗೊಳಿಸಿದ ನಂತರ, ದೇವೇಗೌಡರು ಇಡೀ ರಾಜ್ಯ ಕಾರ್ಯಕಾರಿಣಿಯನ್ನು ವಿಸರ್ಜಿಸಿದ್ದರು. ಇದರ ಪರಿಣಾಮವಾಗಿ ಇಬ್ರಾಹಿಂ ಅವರು ರಾಜ್ಯ ಪಕ್ಷದ ಘಟಕದ ಅಧ್ಯಕ್ಷ ಸ್ಥಾನವನ್ನು ಕಳೆದುಕೊಂಡರು. ಇದೀಗ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಸಿ ಎಂ ಇಬ್ರಾಹಿಂ ಅವರನ್ನು ಜೆಡಿಎಸ್ನಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
