ನವದೆಹಲಿ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ ೩೭೦ನೇ ವಿಧಿಯನ್ನು ರದ್ದುಗೊಳಿಸುವ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ನಾಳೆ(ಡಿ.೧೧) ತೀರ್ಪು ನೀಡಲಿದೆ. ಈ ಹಿನ್ನೆಲೆಯಲ್ಲಿ ಕಾಶ್ಮೀರ ಕಣಿವೆಯಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಎರಡು ವಾರಗಳ ಕಾಲ ವಿಚಾರಣೆ ನಡೆಸಿದ ಬಳಿಕ ಸುಪ್ರೀಂ ಕೋರ್ಟ್ನ ಸಂವಿಧಾನ ಪೀಠ ತೀರ್ಪನ್ನು ಕಾಯ್ದಿರಿಸಿತ್ತು.
![](http://diksoochinews.com/wp-content/uploads/2023/10/diksoochi_inline.jpeg)
೨೦೧೯ರ ಆಗಸ್ಟ್ ೨೮ರಂದು ಮಾಜಿ ಸಿಜೆಐ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ತ್ರಿಸದಸ್ಯ ಪೀಠವು ಈ ಅರ್ಜಿಗಳನ್ನು ಐದು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ಕಳುಹಿಸಿತ್ತು. ೨೦೧೯ರ ಅಕ್ಟೋಬರ್ ೧ ರಂದು ನ್ಯಾಯಮೂರ್ತಿ ಎನ್ವಿ ರಮಣ, ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಆರ್. ಸುಭಾಷ್ ರೆಡ್ಡಿ, ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠವು ನವೆಂಬರ್ ೧೪, ೨೦೧೯ ರಿಂದ ಪ್ರಕರಣದ ವಿಚಾರಣೆ ನಡೆಸಲು ನಿರ್ಧರಿಸಿತ್ತು. ಈ ಅರ್ಜಿಗಳನ್ನು ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠದ ಮುಂದೆ ಇಡಲಾಗಿತ್ತು. ಮಾರ್ಚ್ ೨, ೨೦೨೦ ರಂದು, ಈ ಅರ್ಜಿಗಳನ್ನು ದೊಡ್ಡ ಪೀಠಕ್ಕೆ ಹಸ್ತಾಂತರಿಸಲು ಪೀಠವು ನಿರಾಕರಿಸಿತು.
ಇದರ ನಂತರ, ಜುಲೈ ೧೧, ೨೦೨೩ರಂದು, ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸಂವಿಧಾನ ಪೀಠವು ಆಗಸ್ಟ್ ೨, ೨೦೨೩ ರಿಂದ ಪ್ರಕರಣವನ್ನು ಆಲಿಸಲು ನಿರ್ಧರಿಸಿತು. ಸುಪ್ರೀಂ ಕೋರ್ಟ್ನ ಸಂವಿಧಾನ ಪೀಠವು ೧೬ ದಿನಗಳ ಚರ್ಚೆಯಲ್ಲಿ ೩೭೦ ನೇ ವಿಧಿಯನ್ನು ರದ್ದುಗೊಳಿಸುವ ಐತಿಹಾಸಿಕ, ಸಾಂವಿಧಾನಿಕ ಮತ್ತು ರಾಜಕೀಯ ಅಂಶಗಳನ್ನು ಪರಿಗಣಿಸಿತು.
![](http://diksoochinews.com/wp-content/uploads/2023/10/diksoochi_inline.jpeg)