ಹೊನ್ನಾವರ : ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಯೊಬ್ಬರು ಹೊನ್ನಾವರ ತಾಲೂಕಿನ ಕಾಸರಕೋಡ ಸಮೀಪ ಇಕೋ ಬೀಚ್ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಮಟಾ ತಾಲೂಕಿನ ನಾಡುಮಾಸ್ಕೇರಿ ಮೂಲದ ರಾಮ ನಾಗೇಶ ಗೌಡ (32) ಆತ್ಮಹತ್ಯೆ ಮಾಡಿಕೊಂಡವರು.
ಹೊನ್ನಾವರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
2017ರಲ್ಲಿ ಇವರು ಪೊಲೀಸ್ ಇಲಾಖೆಗೆ ನೇಮಕಗೊಂಡಿದ್ದರು. ಸಾಲ ಬಾಧೆ ಸಾವಿಗೆ ಕಾರಣವಾಗಿರಬಹುದು ಎಂದು ತಿಳಿದುಬಂದಿದೆ.

ರಾಮ ಗೌಡ ಉತ್ತಮ ವಾಲಿಬಾಲ್ ಆಟಗಾರ ಆಗಿದ್ದು ಇತ್ತೀಚೆಗೆ ಸದಾ ಒಂಟಿಯಾಗಿರುತ್ತಿದ್ದ ಎನ್ನಲಾಗಿದೆ. ಈತ ಆನ್ಲೈನ್ ಬೆಟ್ಟಿಂಗ್ ವಿಚಾರದಲ್ಲಿ ವಿವಿಧ ಬ್ಯಾಂಕುಗಳಲ್ಲಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದ್ದು, ಇದೇ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಮೊಬೈಲ್ ಸ್ವಿಚ್ಡ್ ಆಫ್ ಮಾಡಿ ಠಾಣೆಯ ಕರ್ತವ್ಯಕ್ಕೆ ಗೈರಾಗಿದ್ದ. ಈ ಬಗ್ಗೆ ಇಲಾಖಾ ಮಟ್ಟದಲ್ಲಿ ಆತನ ಪತ್ತೆ ಮಾಡುವ ಕಾರ್ಯ ಕೂಡ ನಡೆಸಲಾಗಿತ್ತೆನ್ನಲಾಗಿದೆ. ಮಂಗಳವಾರ ಕಾನ್ಸ್ಟೇಬಲ್ ಮೃತದೇಹ ಸಮುದ್ರ ತೀರದ ಪಾರ್ಕ್ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಮೀಪದಲ್ಲಿ ಬ್ಯಾಗ್ ಕೂಡ ದೊರೆತಿದೆ ಎನ್ನಲಾಗಿದೆ.
ಹೊನ್ನಾವರ ಪಿಎಸೈ ಪ್ರವೀಣಕುಮಾರ ಹಾಗೂ ಆರ್.ಎಫ್.ಓ ವಿಕ್ರಂ ರೆಡ್ಡಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

