ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ತಾಲ್ಲೂಕು ಆರೋಗ್ಯಾಧಿಕಾರಿಯಾಗಿರುವ ಡಾ.ನಾಗಭೂಷಣ ಉಡುಪ ಅವರನ್ನು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಜಿಲ್ಲಾ ಆರೋಗ್ಯಾಧಿಕಾರಿಯಾಗಿರುವ ಡಾ.ಸುಧೀರಚಂದ್ರ ಸೂಡ ಅವರು ಮೇ.31 ರಂದು ಸೇವಾ ನಿವೃತ್ತಿ ಹೊಂದಲಿದ್ದು, ಅವರ ಸ್ಥಾನಕ್ಕೆ ಡಾ.ಉಡುಪ ಅವರನ್ನು ನೇಮಕ ಮಾಡಲಾಗಿದೆ. ಮೂಲತ: ಕುಂದಾಪುರ ತಾಲ್ಲೂಕಿನವರಾದ ಡಾ.ನಾಗಭೂಷಣ ಅವರು ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು, ಬಳಿಕ ಉಡುಪಿಯಲ್ಲಿ ರಾಷ್ಟ್ರೀಯ ಆರೋಗ್ಯ ಮೆಷನ್ ವಿಭಾಗದ ವೈದ್ಯಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.
ಕಳೆದ ಕೆಲವು ವರ್ಷಗಳಿಂದ ಕುಂದಾಪುರ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಎರಡು ಬಾರಿ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿಗೆ ಪ್ರಭಾರ ಅಧಿಕಾರ ನಿರ್ವಹಣೆಯನ್ನು ಅವರು ಉತ್ತಮ ರೀತಿಯಲ್ಲಿ ಮಾಡಿದ್ದರು. ಕೊರಗರ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಕೊರಗ ಸಮುದಾಯದ ಆರೋಗ್ಯ ಸಲಹಾ ವೈದ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಯ ಸಹಾಯಕ ಗವರ್ನರ್ ಆಗಿಯೂ ಕರ್ತವ್ಯ ಸಲ್ಲಿಸಿದ್ದಾರೆ.
ಶ್ರಮ ಜೀವಿ, ಜನ ಮೆಚ್ಚಿದ ಅಧಿಕಾರಿ
ಸೇವಾ ಕ್ಷೇತ್ರದಲ್ಲಿ ಉತ್ತಮ ಸಾರ್ವಜನಿಕ ಸಂಪರ್ಕ ಹೊಂದಿರುವ ಅಧಿಕಾರಿಯಾಗಿರುವ ಅವರು ರಾಷ್ಟ್ರೀಯ ಆರೋಗ್ಯ ಮಿಷನ್ ವಿಭಾಗದ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಜಿಲ್ಲೆಯ ಮಲೆನಾಡು ಹಾಗೂ ಗ್ರಾಮೀಣ ಭಾಗಗಳಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದು ಜನಮನ್ನಣೆ ಪಡೆದಿದ್ದಾರೆ. ಕೋವಿಡ್ 19 ನಿಯಂತ್ರಣಕ್ಕಾಗಿ ಕುಂದಾಪುರ ಹಾಗೂ ಬೈಂದೂರು ತಾಲ್ಲೂಕಿನಲ್ಲಿ ಸೋಂಕು ಹಬ್ಬುವುದನ್ನು ಕಡಿಮೆ ಮಾಡಲು ಹಲವಾರು ಯೋಜನೆಗಳನ್ನು ಪರಿಚಯಿಸಿ ಅವರು ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದರು. ಕೋವಿಡ್ ಗಂಟಲು ಪರೀಕ್ಷೆಗಾಗಿ ರಾಜ್ಯದಲ್ಲಿ ಮೊದಲ ಬಾರಿ ಸಂಚಾರಿ ಘಟಕವನ್ನು ಪರಿಚಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಸೋಂಕಿತರ ಸಂಖ್ಯೆ ಹೆಚ್ಚಾದಾಗ ಆರೈಕೆ ಕೇಂದ್ರಗಳ ಸ್ಥಾಪನೆಯ ಪ್ರಾಸ್ತಾವನೆಗಳು ಬಂದಾಗಲೂ, ರೆಡ್ಕ್ರಾಸ್, ರೋಟರಿ, ಲಯನ್ಸ್ ಹಾಗೂ ಇತರ ದಾನಿಗಳ ನೆರವನ್ನು ಕ್ರೋಢಿಕರಿಸಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ನಾಗಭೂಷಣ ಅವರ ಶ್ರಮ ಗಮನಾರ್ಹ. ಸರ್ಕಾಋಇ ಕರ್ತವ್ಯದ ಜೊತೆಗೆ ಕೃಷಿಕರಾಗಿಯೂ ಉಡುಪ ಶ್ರಮಿಸುತ್ತಾರೆ. ತಮ್ಮ ಕೃಷಿ ತೋಟದಲ್ಲಿ ಬೆವರ ಹರಿಸುತ್ತಾರೆ.